ಇನ್ಮುಂದೆ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ಶೇ.7.5ರಷ್ಟು ಮೀಸಲಾತಿ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಭರ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿ ನಿಯಮಾವಳಿಗೆ ಮಹತ್ವದ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. 2006ರ ‘ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ ನಿಯಮಾವಳಿ’ಗೆ ತಿದ್ದುಪಡಿ ತರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ನೀಡಲಾಗುವ ಒಟ್ಟು ಶೇಕಡಾ 15ರಷ್ಟು ಗ್ರಾಮೀಣ ಮೀಸಲಾತಿಯಲ್ಲಿ ಆಂತರಿಕ ವರ್ಗೀಕರಣ (ಹಾರಿಜಾಂಟಲ್ ಮೀಸಲಾತಿ) ಮಾಡಲು ಪ್ರಸ್ತಾಪಿಸಲಾಗಿದೆ.

ಮೀಸಲಾತಿಯ ಆಂತರಿಕ ವರ್ಗೀಕರಣದ ವಿವರ

ಹೊಸ ಕರಡು ನಿಯಮಾವಳಿಗಳ ಪ್ರಕಾರ, ಗ್ರಾಮೀಣ ಅಭ್ಯರ್ಥಿಗಳಿಗೆ ಲಭ್ಯವಿರುವ ಒಟ್ಟು ಶೇಕಡಾ 15ರಷ್ಟು ಸರ್ಕಾರಿ ಸೀಟುಗಳನ್ನು ಎರಡು ಭಾಗಗಳಾಗಿ ವಿಂಗಡಿಸಲಾಗುತ್ತದೆ. ಮೊದಲ ಭಾಗವಾಗಿ, ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಿರ್ವಹಿಸಲ್ಪಡುವ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡಾ 7.5ರಷ್ಟು ಸೀಟುಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಲಾಗುತ್ತದೆ. ಎರಡನೇ ಭಾಗವಾಗಿ, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಇತರೆ ಶಿಕ್ಷಣ ಸಂಸ್ಥೆಗಳು ಅಥವಾ ಖಾಸಗಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಉಳಿದ ಶೇಕಡಾ 7.5ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ

ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಸುನೀತಾ ಆರ್. ಬಿದಿರೆ ಅವರ ಹೆಸರಿನಲ್ಲಿ ಸೆಪ್ಟೆಂಬರ್ 5, 2026 ರಂದು ಈ ಕರಡು ಅಧಿಸೂಚನೆ ಹೊರಬಿದ್ದಿದೆ. ಈ ತಿದ್ದುಪಡಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಯಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳು ಇದ್ದಲ್ಲಿ, ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಒಳಗಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆ ಅಥವಾ ಸಲಹೆಗಳನ್ನು ಕಳುಹಿಸಲು ಬಯಸುವವರು ‘ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ, ಎಂ.ಎಸ್. ಬಿಲ್ಡಿಂಗ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು- 560 001’ ಈ ವಿಳಾಸಕ್ಕೆ ತಲುಪಿಸಬೇಕಾಗಿದೆ. ನಿಗದಿತ ಅವಧಿಯಲ್ಲಿ ಬರುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ನಿಯಮಾವಳಿಗಳನ್ನು ಸರ್ಕಾರ ಅಧಿಕೃತವಾಗಿ ಜಾರಿಗೆ ತರಲಿದೆ

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others