ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ, ಡಿಕೆಶಿಯಿಂದಲೂ ಅಭಿವೃದ್ಧಿ ಅಸಾಧ್ಯ: ಬಿವೈ ವಿಜಯೇಂದ್ರ

ಬೀದರ್: ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಪರಿಣಾಮ ಒಂದು ಕಡೆ ಆಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಪ್ರಶ್ನೆಗೆ ಇಂದು ಉತ್ತರ ನೀಡಿದ ಅವರು, ಅಧಿಕಾರದ ಮದ ನೆತ್ತಿಗೇರಿದಾಗ ಹೀಗೆಲ್ಲ ಮಾಡಿಸುತ್ತದೆ ಎಂದು ಟೀಕಿಸಿದರು. ಆಳಂದದಲ್ಲಿ ಕೇಸುಗಳನ್ನು ಹಿಂಪಡೆದಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡಿ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಹೇಗೆ ನಡೆಯಲಿದೆ ಎಂದು ನಾನು ಹೇಳುವ ಅವಶ್ಯಕತೆ ಇಲ್ಲ. ತಮಗೆ ಗೊತ್ತಿರುವ ಹಾಗೆ ಕಳೆದ 3 ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಭ್ರಷ್ಟಾಚಾರ, ಅಲ್ಪಸಂಖ್ಯಾತರ ಓಲೈಕೆ ಬಿಟ್ಟರೆ ಬೇರೇನೂ ಕಳೆದ 3 ವರ್ಷಗಳಲ್ಲಿ ಆಗಿಲ್ಲ; ಇವರ ಗ್ಯಾರಂಟಿಗಳಿಂದ ಇವರ ಕೈಯನ್ನು ಕಟ್ಟಿ ಹಾಕಿಕೊಂಡಿದ್ದಾರೆ. ಅನುದಾನದ ಕೊರತೆಯಿಂದ ಡಿ.ಕೆ.ಶಿವಕುಮಾರ್ ಕೂಡ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಡಿ.ಕೆ.ಶಿವಕುಮಾರ್ ಅವರು ಮೊದಲು ಪ್ರಮಾಣವಚನ ತೆಗೆದುಕೊಳ್ಳಲಿ. ಬಿಜೆಪಿ ಅವರನ್ನು ಹೇಗೆ ಎದುರಿಸಬೇಕೋ ಎಲ್ಲವನ್ನೂ ಮಾಡುತ್ತೇವೆ ಎಂದರು.

ರಾಜ್ಯಸಭೆ ಚುನಾವಣೆ ಸಂಬಂಧ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ನೋಡಿಕೊಂಡು ನಮ್ಮ ಕೇಂದ್ರದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

Share it :

Leave a Reply

Your email address will not be published. Required fields are marked *