ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾರಾಂತ್ಯದ ಸಂಜೆ ವರುಣನ ಅಬ್ಬರ ಜೋರಾಗಿದೆ. ನಗರದ ಹಲವು ಭಾಗಗಳಲ್ಲಿ ದಿಢೀರನೆ ಧಾರಾಕಾರ ಮಳೆ ಸುರಿದಿದ್ದು, ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ವಾಹನ ಸವಾರರು ರಸ್ತೆಯಲ್ಲೇ ಸಿಲುಕಿಕೊಳ್ಳುವಂತಾಗಿದೆ.
ಮೆಟ್ರೋ ಸಿಟಿಯಾದ್ಯಂತ ವರುಣನ ದರ್ಶನ: ನಗರದ ಪಶ್ಚಿಮ ಮತ್ತು ಉತ್ತರ ಭಾಗಗಳಾದ ಮಲ್ಲೇಶ್ವರ, ರಾಜಾಜಿನಗರ, ಯಶವಂತಪುರ, ವಿಜಯನಗರ, ಪೀಣ್ಯ ಹಾಗೂ ಜಾಲಹಳ್ಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಕೆಲವೇ ನಿಮಿಷಗಳ ಮಳೆಗೆ ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಪ್ರಮುಖ ಜಂಕ್ಷನ್ಗಳಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಗಿದೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ: ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಮುಂದಿನ ಮೂರು ಗಂಟೆಗಳ ಕಾಲ ರಾಜಧಾನಿಯಲ್ಲಿ ಮತ್ತಷ್ಟು ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ನೆರೆ ಜಿಲ್ಲೆಗಳಿಗೂ ಮಳೆ ಭೀತಿ: ಬೆಂಗಳೂರು ನಗರ ಮಾತ್ರವಲ್ಲದೆ ಸುತ್ತಮುತ್ತಲಿನ ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಹವಾಮಾನದಲ್ಲಿ ತೀವ್ರ ಏರುಪೇರಾಗಿದ್ದು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಇತ್ತ ಉತ್ತರ ಕರ್ನಾಟಕದ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಿದೆ.





