Janardhana Reddy
ಬಳ್ಳಾರಿ: ರಾಜ್ಯದ ರಾಜಕಾರಣದಲ್ಲಿ ದಿನಕ್ಕೊಂದು ಖ್ಯಾತೆ-ಗಲಭೆ ಅಗರಣಗಳು ನಡೆಯುತ್ತಲೇ ಇರುತ್ತಿದ್ದು, ಕೆಲ ವೇಳೆ ರಾಜಕಾರಣಿಗಳು ಸಂಕಟಕ್ಕೆ ಸಿಲುಕಿಕೊಳ್ಳುತ್ತಾರೆ. ಇದೀಗ ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಲಿಯಾಗಿದ್ದಾರೆ.
ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಬಗ್ಗೆ ವರದಿ ನೀಡುವಂತೆ ರಾಜ್ಯ ಅರಣ್ಯ ಇಲಾಖೆಗೆ ಕೇಂದ್ರ ಪರಿಸರ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.
ಒಎಂಸಿ ಕಂಪನಿ ಕರ್ನಾಟಕ ಮತ್ತು ಆಂಧ್ರದ ನಡುವಿನ ಅಂತಾರಾಜ್ಯ ಗಡಿ ನಾಶಪಡಿಸಿದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಮೀಸಲು ಅರಣ್ಯ ಪ್ರದೇಶಗಳಾದ ವಿಠಲಾಪುರ, ತುಮಟಿ ಸೇರಿ ವಿವಿಧೆಡೆ ಅಕ್ರಮವಾಗಿ 28.90 ಲಕ್ಷ ಟನ್ ಅದಿರನ್ನು ಹೊರತೆಗೆದು ಸಾಗಣೆ ಮಾಡಲಾಗಿದೆ ಎಂಬುದು ಸಾಬೀತಾಗಿದ್ದ ಪರಿಣಾಮ ಸಿಬಿಐ ನ್ಯಾಯಾಲಯ ಜನಾರ್ದನ ರೆಡ್ಡಿಗೆ ಶಿಕ್ಷೆ ಕೂಡ ವಿಧಿಸಿತ್ತು.
ಇನ್ನು ಈ ವಿಚಾರವಾಗಿ ಟಪಾಲ್ ಗಣೇಶ್ ಪ್ರತಿಕ್ರಿಯಿಸಿದ್ದಾರೆ.ಸಿಬಿಐ ಕೋರ್ಟ್ ಆದೇಶದ ಪ್ರತಿಗಳನ್ನ ಓದುವಷ್ಟು ಸಮಯವೂ ಇವರಿಗಿಲ್ಲ. ಹೀಗಾಗಿ ತಾನು ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದಿದ್ದೆ. ನಾನು ಕೊಟ್ಟಿದ್ದ ದೂರಿನ ಮೇರೆಗೆ ಇದೀಗ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ. ಜನಾರ್ದನ ರೆಡ್ಡಿ 884 ಕೋಟಿ ಮೌಲ್ಯದ ಸಂಪತ್ತು ಲೂಟಿ ಮಾಡಿದ್ದಾರೆ. ಆಂಧ್ರದ ಪರ್ಮಿಟ್ ಮೇಲೆ ರಾಜ್ಯದ ಅದಿರು ದೋಚಿದ್ದಾರೆ. ಇಷ್ಟೆಲ್ಲ ಅಕ್ರಮ ಸಾಬೀತಾದರೂ ರಾಜ್ಯದ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಟಪಾಲ್ ಗಣೇಶ್ ತಿಳಿಸಿದ್ದಾರೆ.
ಇನ್ನು ಕೆಲ ತಿಂಗಳ ಹಿಂದೆ ನಿವೃತ್ತ ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಂಧ್ರದ ರಾಯಹಹದುರ್ಗ ತಾಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೋನ್ ಮೂಲಕ ಸರ್ವೇ ನಡೆಸಿತ್ತು. ಇದರಲ್ಲಿ ಅಂತರಗಂಗಮ್ಮ ಹೆಸರಿನ 68.50 ಹೆಕ್ಟೇರ್, ಸಿದ್ದಾಪುರದಲ್ಲಿನ ಬಿಐಒಸಿ ಕಂಪನಿಯ 27.12 ಹೆಕ್ಟೇರ್, ವೈ. ಮಹಾಬಲೇಶ್ವರಪ್ಪ ಸನ್ಸ್ ಹೆಸರಿನ 20.24 ಹೆಕ್ಟೇರ್, ಓಬಳಾಪುರಂ ಗ್ರಾಮದಲ್ಲಿನ ಒಎಂಸಿ ಹೆಸರಿನ 25.98 ಹೆಕ್ಟೇರ್, ಒಎಂಪಿ2 ಹೆಸರಿನ 39.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಸಂಬಂಧ ಎರಡು ಹಂತಗಳಲ್ಲಿ ಸರ್ವೇ ಮಾಡಿತ್ತು ಎನ್ನಲಾಗಿದೆ.
ಈ ಸರ್ವೇಯಲ್ಲಿ ಜನಾರ್ದನ ರೆಡ್ಡಿ ಒಡೆತನದ ಒಎಂಸಿಯ ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ್ಮ ಹೆಸರಲ್ಲಿ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ.ಈ ಕಾರಣಕ್ಕೆ ಕಂಪನಿಗಳುರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ತಂಡ ವರದಿ ನೀಡಿತ್ತು. ಇದೇ ವರದಿಯನ್ನ ದೂರುದಾರ ಟಪಾಲ್ ಗಣೇಶ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ್ದರುಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.




