ಬೆಂಗಳೂರು: ನಾನು ಹಿರಿಯೂರು ಉಪ ಚುನಾವಣೆಗೆ ಸ್ಪರ್ಧಿಸೋದಿಲ್ಲ. ನಾನು ಕೇಂದ್ರ ರಾಜಕಾರಣದಲ್ಲಿ ಇಲ್ಲ, ರಾಜ್ಯ ರಾಜಕಾರಣದಲ್ಲೇ ಇರುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷ. ಹೀಗಾಗಿ ಪಕ್ಷದ ಸಂಘಟನೆಯ ಜವಾಬ್ದಾರಿ ನನಗಿದೆ. ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ. ಆದರೆ ಈಗಲೇ ಅಲ್ಲ ಎಂದ ಅವರು; ನಾನು ರಾಜ್ಯಕ್ಕೆ ವಾಪಸ್ ಬರುತ್ತೇನೆ ಎಂದರೆ ಅದು ಈಗಲೇ ಎಂದಲ್ಲ. ಸದ್ಯಕ್ಕೆ ನಾನು ಕೇಂದ್ರ ಸಚಿವನಾಗಿದ್ದೇನೆ, ಇನ್ನೂ ಮೂರು ವರ್ಷ ಸಂಸದನಾಗಿ ಅಧಿಕಾರಾವಧಿ ಇದೆ. ಹಾಗಾಗಿ ಇವತ್ತೇ, ನಾಳೆ ದಿನವೇ ಬರುತ್ತೇನೆ ಎಂದಲ್ಲ. ಕೇಂದ್ರದಲ್ಲಿ ನನಗೆ ಜವಾಬ್ದಾರಿ ನೀಡಲಾಗಿದೆ, ಅದನ್ನು ನಿಭಾಯಿಸುತ್ತಲೇ ರಾಜ್ಯದಲ್ಲಿ ಪಕ್ಷ ಸಂಘಟನೆಯನ್ನೂ ಮಾಡುತ್ತೇನೆ. ಕೇಂದ್ರ ಮತ್ತು ರಾಜ್ಯ ಎರಡೂ ಕಡೆಗಳಲ್ಲಿ ನಾನು ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಪ್ರಶ್ನೆ ಒಂದಕ್ಕೆ ಉತ್ತರ ನೀಡಿದರು.
ಹಿರಿಯೂರು ಉಪ ಚುನಾವಣೆಗೆ ಜೆಡಿಎಸ್ ಸಿದ್ಧತೆ:
ಹಿರಿಯೂರು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ನಮ್ಮ ಪಕ್ಷದಲ್ಲಿ ಒತ್ತಡ ಇದೆ. ಈ ಬಗ್ಗೆ ಬಿಜೆಪಿ ಉನ್ನತ ನಾಯಕರ ಜತೆ ಚರ್ಚೆ ನಡೆಸಿದ್ದೇನೆ. ಹಿರಿಯೂರು ಕ್ಷೇತ್ರದ ಮುಖಂಡರ ಜತೆ ಎರಡು ಮೂರು ಸಭೆಗಳನ್ನು ನಡೆಸಿದ್ದೇನೆ. ಸಮಯ ಇದೆ, ನೋಡೋಣ ಎಂದರು.





