ಪುತ್ತೂರು ಹಲ್ಲೆ ಪ್ರಕರಣ: ಅಪರಾಧಿಗಳು ಪೊಲೀಸರನ್ನೇ ಧಿಕ್ಕರಿಸುವಂತಾಗಿದೆ – ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಪುತ್ತೂರಿನಲ್ಲಿ ಹಿಂದೂ ಮಹಿಳೆಯೊಬ್ಬರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌’ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಶೋಭಾ ಕರಂದ್ಲಾಜೆ ಅವರು, ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಬಳಿಕ ಹಲ್ಲೆ ನಡೆಸಿದವರು ಪೊಲೀಸ್ ಜೀಪ್‌ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮುಂದುವರಿಸಿದ್ದಾರೆ.

ಅಪರಾಧಿಗಳಿಗೆ ಕಾಂಗ್ರೆಸ್ ಸರ್ಕಾರದ ರಕ್ಷಣೆ ಸಿಗುತ್ತಿದೆ. ಅಪರಾಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ. ಇದೀಗ ಸರ್ಕಾರ ತಮ್ಮ ಬೆನ್ನಿಗಿದೆ ಎಂದು ನಂಬಿರುವ ಮತಾಂಧ, ಸಮಾಜವಿರೋಧಿ ಮತ್ತು ದೇಶವಿರೋಧಿ ಶಕ್ತಿಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೀವು ಸಂಪೂರ್ಣವಾಗಿ ವಿಫಲರಾಗಿದ್ದೀರಿ. ಹಿಂದೂ ಮಹಿಳೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ, ಅಪರಾಧಿಗಳು ಯಾವುದೇ ಭಯವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಇದರ ಬೆಲೆಯನ್ನು ಕರ್ನಾಟಕದ ಜನತೆ ತೆರುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಈ ವಿಚಾರದಲ್ಲಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಅಪರಾಧಿಗಳು ಪೊಲೀಸರನ್ನೇ ಬಹಿರಂಗವಾಗಿ ಧಿಕ್ಕರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಅದು ನಿಮ್ಮ ಆಡಳಿತದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಪೊಲೀಸರ ಎದುರೇ ಅಪರಾಧಿಗಳು ಈ ರೀತಿಯಾಗಿ ವರ್ತಿಸಿರುವುದು ಅವರ ‘ಧೈರ್ಯ’ವನ್ನು ತೋರಿಸುತ್ತದೆ, ಕಾಂಗ್ರೆಸ್ ಸರ್ಕಾರವೇ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ರಾಜಕೀಯ ರಕ್ಷಣೆಯಿಂದಾಗಿ ಅಪರಾಧಿಗಳಿಗೆ ಭಯವೇ ಇಲ್ಲದಂತಾಗಿದೆ ಎಂದು ದೂರಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others