UT Khadar
ಬೆಂಗಳೂರು: ಇನ್ನು ಮುಂದೆ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಭೇಟಿ ನೀಡುವ ಬಡ ಮತ್ತು ಸಾಮಾನ್ಯ ರೋಗಿಗಳಿಗೆ ಸ್ಪಂದಿಸಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಕಷ್ಟಗಳು ಮತ್ತು ಗೊಂದಲಗಳು ಹಾಗೂ ಸಿಬ್ಬಂದಿಗಳ ನಡೆಗಳ ಕುರಿತಾದ ದೂರುಗಳನ್ನು ಆಲಿಸಲು ಆರೋಗ್ಯ ಸಚಿವರ ಕಚೇರಿಯಿಂದಲೇ ನೇರವಾಗಿ ನಿಯಂತ್ರಿಸಲ್ಪಡುವ 24×7 ಹೆಲ್ಪ್ಲೈನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ಸೂಚಿಸಿದರು.
ಈ ನಿರ್ಧಾರದಿಂದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಉನ್ನತ ಮಟ್ಟದಲ್ಲಿ ಅನುಕೂಲವಾಗಲಿದೆ. ಅಷ್ಟೇ ಅಲ್ಲದೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಯಾವುದೇ ಸಮಸ್ಯೆ ಎದುರಾದರು ಶಿಘ್ರವೆ ಪ್ರತಿಕ್ರಿಯೆ ನೀಡಲಾಗುವುದು.
ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿ ವಿಳಂಬ ಮಾಡುವುದು ಅಥವಾ ರೋಗಿಗಳಿಂದ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಡುವ ಆಸ್ಪತ್ರೆಗಳ ವಿರುದ್ಧ ಈ ಹೆಲ್ಪ್ಲೈನ್ ಮುಖಾಂತರ ಸಾರ್ವಜನಿಕರು ನೇರವಾಗಿ ದೂರು ನೀಡಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಆಸ್ಪತ್ರೆಗಳಿಗೆ ಹೋಗುವ ರೋಗಿಗಳಿಗೆ ಸಾಕಷ್ಟು ಅನುಮಾನಗಳಿರುತ್ತವೆ. ಇನ್ನು ಕೆಲವು ಕಡೆ ಕೆಲ ಸಂದರ್ಭಗಳಲ್ಲಿ ಆಸ್ಪತ್ರೆಯ ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ ಎಂಬ ದೂರುಗಳಿವೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೊಸದಾಗಿ ಆರಂಭಿಸಲಾಗುವ ಸಹಾಯವಾಣಿ ಸಂಖ್ಯೆಯನ್ನು ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕಡ್ಡಾಯವಾಗಿ ಪ್ರದರ್ಶಿಸಲಾಗುವುದು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಮಾಹಿತಿ ತಿಳಿಸಿದ್ದಾರೆ.
ಈ ಮಹತ್ತರ ನಿರ್ಧಾರ ಸಾರ್ವಜನಿಕರಿಗೆ ಮತ್ತು ಬಡ ರೋಗಿಗಳಿಗೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎನ್ನುವುದು ಕಾದುನೋಡಬೇಕಿದೆ.





