ಬಾಗಲಕೋಟೆ: ಇನ್ನು ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ವೇಳೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಸಂಪುಟ ವಿಸ್ತರಣೆಯ ಸಂಪೂರ್ಣ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿದ್ದು. ಈ ವಿಷಯದಲ್ಲಿ ಹೈಕಮಾಂಡ್ತೀರ್ಮಾನವೇ ಅಂತಿಮ, ನನ್ನ ಕೈಯಲ್ಲಿ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಬಾಗಲಕೋಟೆ ಜಿಲ್ಲಾದ್ಯಂತ ಬರ ನಿರ್ವಹಣೆಗಾಗಿ 12 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿ ನಿಧಿ ಕೂಡ ಸಿದ್ಧವಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮುಗಿಸುತ್ತೇವೆ ಎಂದು ಎಂ.ಬಿ. ಪಾಟೀಲ್ ಭರವಸೆ ನೀಡಿದರು.
ಅಗತ್ಯ ಬಿದ್ದರೆ ಉಳಿದೆಲ್ಲ ಯೋಜನೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುತ್ತೇವೆ. ಆದರೆ ಜನರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಮೊದಲ ಕರ್ತವ್ಯ ಎಂದು ಕಟ್ಟುನಿಟ್ಟಾಗಿ ಹೇಳಿದರು. ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ನಿಮ್ಮ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು.ಜಿಲ್ಲೆಯ ಬರ ಪರಿಸ್ಥಿತಿ ಮತ್ತು ವಿಪತ್ತು ನಿರ್ವಹಣೆ ಕುರಿತು ಮಾತನಾಡಿದ ಸಚಿವರು, ಕುಡಿಯುವ ನೀರಿನ ನಿರ್ವಹಣೆಗೆ ಹಣದ ಕೊರತೆ ಇಲ್ಲವೇ ಇಲ್ಲ ಎಂದರು.




