- Rain, school holidays: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಅವಾಂತರಗಳು ಸಂಭವಿಸಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲ ತಾಲೂಕುಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಎಂಬ ಮಾಹಿತಿ ಇಲ್ಲಿದೆ.
- ಕಾರವಾರ, ಜುಲೈ 06: ತಿಂಗಳು ತಡವಾಗಿ ಬಂದರೂ ಮುಂಗಾರಿನ ಅಬ್ಬರ ಜೋರಾಗಿದೆ. ಹಲವೆಡೆ ವರುಣ (rain) ಅಬ್ಬರಿಸುತ್ತಿದ್ದಾನೆ. ಮಹಾಮಳೆಯ ಆರ್ಭಟಕ್ಕೆ ಕೆಲವೆಡೆ ಅವಾಂತರಗಳು ಸಂಭವಿಸಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗಳಿಗೆ ಜುಲೈ 07ರಂದು ರಜೆ (Schools Holidays) ಘೋಷಿಸಲಾಗಿದೆ.
- ಯಾವೆಲ್ಲಾ ತಾಲೂಕುಗಳಲ್ಲಿ ರಜೆ
- ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಸೋಮವಾರ ಆದೇಶ ಹೊರಡಿಸಿದ್ದಾರೆ.
- 3 ತಾಲೂಕಿನಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಣೆ
- ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲೆಗಳಿಗೆ ಜಿಲ್ಲಾಡಳಿತ ನಾಳೆ ರಜೆ ಘೋಷಿಸಿದೆ. ಕೊಪ್ಪ, ಶೃಂಗೇರಿ ಮತ್ತು ಕಳಸ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.
- ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ: ಶಾಲಾ-ಕಾಲೇಜಿಗೆ ರಜೆ
- ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ವ್ಯಾಪಕ ಮಳೆಯ ಹಿನ್ನೆಲೆ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಹಾಗೂ ಖಾನಾಪುರ ಎರಡೂ ತಾಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ. ಪಶ್ಚಿಮ ಘಟ್ಟ ಪ್ರದೇಶ ಮತ್ತು ಬೆಳಗಾವಿ ನಗರದಲ್ಲಿ ನಾಳೆಯೂ ಭಾರೀ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
- ನಾಳೆ 3 ತಾಲೂಕಿನ ಶಾಲಾ-ಕಾಲೇಜಿಗೆ ರಜೆ
- ಶಿವಮೊಗ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಮೂರು ತಾಲೂಕಿನಲ್ಲಿ ಶಾಲಾ, ಕಾಲೇಜುಗಳಿಗೂ ಮಂಗಳವಾರ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ಸೂಚನೆ ಮೇರೆಗೆ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಅನ್ವಯಿಸಲಿದೆ. ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಶಾಲಾ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.





