ಸಚಿವರ ಹೆಸರಲ್ಲಿ ಕಮೀಷನ್ ದಂಧೆಗೆ ಇಳಿದವರಿಗೆ ಈಶ್ವರ್ ಖಂಡ್ರೆ ಶಾಕ್: 7 ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಆದೇಶ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್‌ಐಡಿಎಲ್) ಮಂಗಳೂರು ವಿಭಾಗದಲ್ಲಿ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರಿಂದ ಶೇಕಡಾ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ, ಪ್ರಕರಣದ ಕುರಿತು ಕೂಲಂಕಷ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಇಲಾಖಾ ಕಾರ್ಯದರ್ಶಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.

ಶಾಸಕರ ದೂರಿನ ಹಿನ್ನೆಲೆ

ಮಂಗಳೂರು ಕೆಆರ್‌ಐಡಿಎಲ್ ಕಚೇರಿಯ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರ ಎಸಗುತ್ತಿದ್ದು, ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ಹಣ ಪೀಕುತ್ತಿದ್ದಾರೆ ಎಂದು ಆರೋಪಿಸಿ ಪುತ್ತೂರು ಶಾಸಕ ಕೆ.ಎ. ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಈ ಕುರಿತು ಮಾಧ್ಯಮಗಳಲ್ಲಿಯೂ ಮುಖಪುಟ ವರದಿಗಳು ಪ್ರಕಟವಾಗಿ ವ್ಯಾಪಕ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.

ವಾರದೊಳಗೆ ತನಿಖಾ ವರದಿಗೆ ಗಡುವು

ಈ ಬೆಳವಣಿಗೆಯನ್ನು ಪರಿಶೀಲಿಸಿದ ಸಚಿವರು, ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡವನ್ನು ನಿಯೋಜಿಸಲು ಸೂಚಿಸಿದ್ದಾರೆ. ಶಾಸಕರು ಮಾಡಿರುವ ಆರೋಪಗಳಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ಪರಿಶೀಲಿಸಿ, ಎಂಜಿನಿಯರ್‌ಗಳು ತಪ್ಪೆಸಗಿರುವುದು ಸಾಬೀತಾದರೆ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಶಿಫಾರಸು ಮಾಡಿ 7 ದಿನಗಳ ಒಳಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿದ್ದಾರೆ.

ಇಲಾಖೆಯ ಉಸ್ತುವಾರಿ ಸಚಿವರ ಹೆಸರನ್ನು ಮುಂದಿಟ್ಟುಕೊಂಡು ಯಾವುದೇ ಅಧಿಕಾರಿಗಳು ಇಲ್ಲವೇ ಎಂಜಿನಿಯರ್‌ಗಳು ಹಣ ವಸೂಲಿಗಿಳಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಮ್ಮ ಆದೇಶದ ಟಿಪ್ಪಣಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others