ರಾಯಚೂರಿನ ವಸತಿ ಶಾಲೆಯಲ್ಲಿ ಪಲಾವ್ ತಿಂದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ವಸತಿ ಶಾಲೆಯಲ್ಲಿ ಹುಳ ಬಿದ್ದಿದ್ದ ಪಲಾವ್ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೂರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಡೆದಿದೆ.

ವಸತಿ ಶಾಲೆಯಲ್ಲಿ ಶುಕ್ರವಾರ ನೀಡಲಾಗಿದ್ದ ಪಲಾವ್ ತಿಂದ ಕೆಲವೇ ಹೊತ್ತಿನಲ್ಲಿ ಮಕ್ಕಳಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ಕೆಲ ವಿದ್ಯಾರ್ಥಿಗಳಿಗೆ ತೀವ್ರ ತಲೆನೋವು ಮತ್ತು ತಲೆಸುತ್ತು ಉಂಟಾಗಿ ತೀವ್ರ ಯಾತನೆ ಅನುಭವಿಸಿದ್ದಾರೆ. ತಕ್ಷಣವೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.

ವಾರ್ಡನ್ ವಿರುದ್ಧ ಪೋಷಕರ ಆಕ್ರೋಶ:

ಮಕ್ಕಳಿಗೆ ಕಳಪೆ ಹಾಗೂ ಹುಳ ಬಿದ್ದಿದ್ದ ಆಹಾರ ನೀಡಿದ್ದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿರುವ ಪೋಷಕರು, ವಸತಿ ಶಾಲೆಯ ವಾರ್ಡನ್ ಅಮರಗುಂಡಪ್ಪ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳ ಆರೋಗ್ಯದ ಜೊತೆ ಬೇಜವಾಬ್ದಾರಿಯಿಂದ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪೋಷಕರು ಆಗ್ರಹಿಸಿದ್ದಾರೆ.

Share it :

Leave a Reply

Your email address will not be published. Required fields are marked *