ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ? ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು.
ಬೆಂಗಳೂರಿನಲ್ಲಿ ಹೆಬ್ಬಾಳ ಜಂಕ್ಷನ್ನಿಂದ ಪಶು ವೈದ್ಯಕೀಯ ಸಿಬ್ಬಂದಿ ವಸತಿ ಸಮುಚ್ಚಯದವರೆಗೆ ನಿರ್ಮಿಸಲು ಉದ್ದೇಶಿಸಿರುವ 3 ಪಥದ ಸುರಂಗ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮೀಡಿಯಾದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದ ನಂತರ ಅವರ ಯುಗಾಂತ್ಯವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೈರತಿ ಸುರೇಶ್, ರಾಜಕೀಯದಲ್ಲಿ ಯುಗಾಂತ್ಯವೆಂಬುದಾಗಲೀ, ಆರಂಭ ಎಂಬುದಾಗಲೀ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯನವರ ಆಶೀರ್ವಾದ ನಮಗಿದೆ ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ನಾವು ಜೊತೆಯಲ್ಲೇ ರಾಜಕೀಯ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಹೀಗಾಗಿ ಇವರಿಬ್ಬರೂ ಕಾಂಗ್ರೆಸ್ ಪಕ್ಷದಲ್ಲಿ ಜೋಡೆತ್ತುಗಳಿದ್ದಂತೆ ಎಂದರು.
ಈ ಜೋಡೆತ್ತುಗಳು ಕಳೆದ ಹಲವಾರು ವರ್ಷಗಳಿಂದ ದುಡಿದು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಇವರಿಬ್ಬರು ದುಡಿಯುತ್ತಾ 2028 ಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಶತಃಸಿದ್ಧ ಎಂದು ಹೇಳಿದರು
ಪ್ರಜಾಪ್ರಭುತ್ವದಲ್ಲಿ ಇದೆಲ್ಲಾ ಅಸಾಧ್ಯವಾದ ಮಾತು. ಮುಖ್ಯಮಂತ್ರಿಗಳು ಗೌರವಯುತವಾಗಿ ವಿಧಾನಸೌಧದಲ್ಲಿ ಚರ್ಚೆಗೆ ಆಹ್ವಾನಿಸಿದ್ದರು. ಆದರೆ, ಕುಮಾರಸ್ವಾಮಿಯವರು ಬಂದಿಲ್ಲ ಎಂದು ಹೇಳಿದ ಅವರು, ಈ ಯೋಜನೆಗೆ ವಿರೋಧವಾಗಿರುವವರು ಬಹಳ ಕಮ್ಮಿ. ಪರ ಇರೋರು ಜಾಸ್ತಿ ಇದ್ದಾರೆ. ಶೇ.80 ರಷ್ಟು ರೈತರು ಸಮ್ಮತಿ ಸೂಚಿಸಿದರೆ ಮಾತ್ರ ಯೋಜನೆ ಜಾರಿಗೆ ತರಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಎಂದರು.
ಅದರ ಪ್ರಕಾರವೇ ಬಿಡದಿ ಟೌನ್ಶಿಪ್ಗೆ ಶೇ.80ಕ್ಕಿಂತ ಹೆಚ್ಚು ರೈತರು ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿಯೇ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಬಿಡದಿ ಟೌನ್ಶಿಪ್ ಕುರಿತಾದ ಚರ್ಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂದಿಲ್ಲ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇಂತಹ ಯೋಜನೆ ಬಗ್ಗೆ ಬೀದಿಯಲ್ಲಿ ಕುಳಿತು ಚರ್ಚಿಸಲು ಸಾಧ್ಯವಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.





