ನವದೆಹಲಿ: ಕೇಂದ್ರ ರೈಲ್ವೆ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾಗಿದ್ದ ರವ್ನೀತ್ ಸಿಂಗ್ ಬಿಟ್ಟು ಅವರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಶುಕ್ರವಾರ ಹೊರಡಿಸಿದ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ರವ್ನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದ ಅಧಿಕೃತ ಪ್ರಕಟಣೆ
“ಭಾರತದ ಸಂವಿಧಾನದ ವಿಧಿ 75ರ ಕ್ಲಾಸ್ (2) ರ ಅಡಿಯಲ್ಲಿ ನೀಡಲಾದ ಅಧಿಕಾರದನ್ವಯ, ಪ್ರಧಾನಮಂತ್ರಿಯವರ ಅಭಿಸಂಧಿಯಂತೆ ಶ್ರೀ ರವ್ನೀತ್ ಸಿಂಗ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ” ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಸ್ಪಷ್ಟಪಡಿಸಿದೆ.
ಹಿರಿಯ ಸಿಖ್ ನಾಯಕರಾಗಿರುವ ರವ್ನೀತ್ ಸಿಂಗ್ ಬಿಟ್ಟು ಅವರು ಸಚಿವ ಸ್ಥಾನ ತೊರೆದಿರುವುದು ಪಂಜಾಬ್ನ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಅವರು ಪಂಜಾಬ್ನ ಸಕ್ರಿಯ ರಾಜ್ಯ ರಾಜಕಾರಣಕ್ಕೆ ಮರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.





